02/07/2023
ಅರ್ಥ ಪೂರ್ಣ ವಿಶ್ವ ಪರಿಸರ ದಿನಾಚರಣೆ - 2023 ಸರ್ಕಾರಿ ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಣೆ...
ಕಲಾಬಂಧು ಫೌಂಡೇಶನ್ ವತಿಯಿಂದ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ದಿನಾಂಕ 30.06.2023 ರಂದು ಆಚರಿಸಲಾಯಿತು. ಸಾಂಕೇತಿಕವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದಕ್ಕಿಂತ ಮೊದಲು ತಾಲೂಕಿನ ವಿವಿಧ ಶಾಲೆಗಳಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಾಗಡಿ ತಾಲೂಕು ಮಟ್ಟದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಶ್ರೇಣಿ ವಿಜೇತರಿಗೆ ರೂ. 2000 , 1500, 1000 ಗಳ ನಗದು ಪ್ರತಿಭಾ ಪುರಸ್ಕಾರ ಪ್ರಶಸ್ತಿ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ಇದೆ ಸಂದರ್ಭದಲ್ಲಿ 2022-23 ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಗಳು ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಪ್ರೋತ್ಸಾಹಿಸಲಾಯಿತು. ಗ್ರಾಮೀಣ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಉತ್ತೇಜನಕ್ಕೆ ಅನುಕೂಲವಾಗುವಂತೆ ನೋಟ್ ಪುಸ್ತಕಗಳು ಸೇರಿದಂತೆ ಪಾಠೋಪಕರಣ ಗಳನ್ನು ವಿತರಿಸಲಾಯಿತು. ಕಲಾಬಂಧು ಫೌಂಡೇಶನ್ ಸಂಸ್ಥೆಯ ಅಧ್ಯಕ್ಷ ಶ್ರೀ ನರಸಿಂಹರಾಜು, ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷರಾದ ಶಂಕರ್ , ಹಿರಿಯ ಸಾಹಿತಿ ಡಾ.ಪಾನ್ಯಂ ನಟರಾಜ್, ಪತ್ರಕರ್ತರಾದ ಆಲ್ಬೂರು ಶಿವರಾಜ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಮಂಜುಳಾ, ಸ್ನೇಹ ಪ್ರಿಂಟರ್ಸ್ ಮಾಲೀಕರಾದ ರಂಗಸ್ವಾಮಿ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಕಲಾಬಂಧು ಫೌಂಡೇಶನ್ ಕಾರ್ಯ ಚಟುವಟಿಕೆಗಳು ಹಾಗೂ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಸಂಸ್ಥೆಯ ಅಧ್ಯಕ್ಷರಾದ ಹೆಚ್. ನರಸಿಂಹರಾಜು ರವರು ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಗಣ್ಯರು, ಶಾಲಾ ಶಿಕ್ಷಕರುಗಳನ್ನು ಹಾಗೂ ಸ್ಥಳೀಯ ಪತ್ರಕರ್ತರನ್ನೂ ಸನ್ಮಾನಿಸಿತು.